ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ

ಬೆಂಗಳೂರು, ಜುಲೈ 15,2024 (www.justkannada.in): ರಾಜ್ಯದಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ, ವಾಲ್ಮೀಕಿ ನಿಗಮದಲ್ಲಿನ ಹಗರಣ ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ.

ಇಂದಿನಿಂದ ಜುಲೈ 26ರವರೆಗೆ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ನಡೆಯಲಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ, ವಾಲ್ಮೀಕಿ ನಿಗಮದಲ್ಲಿನ  ಹಗರಣ  ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ, ಜೆಡಿಎಸ್ ಸಜ್ಜಾಗಿವೆ.

ಅಧಿವೇಶನದಲ್ಲಿ ಮುಡಾ ಸೈಟ್ ಹಂಚಿಕೆ, ವಾಲ್ಮೀಕಿ ಅಕ್ರಮವನ್ನೇ ಪ್ರಧಾನವಾಗಿ ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ. ಇದಲ್ಲದೆ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಘೀ ನಿರ್ಲಕ್ಷ್ಯ, ಕಾನೂನು ಸುವ್ಯವಸ್ಥೆ ವಿಷಯಗಳು ಚರ್ಚೆಗೆ ಬರಲಿವೆ.

ಬಿಜೆಪಿ-ಜೆಡಿಎಸ್ ಗೆ ತಿರುಗೇಟು ನೀಡಲು ಸರ್ಕಾರವೂ ಕೂಡ ಸಜ್ಜಾಗಿದೆ. ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಶೇ 40 ಕಮಿಷನ್ ಆರೋಪ, ಕೊರೊನಾ ಕಾಲದ ಹಗರಣ, ಬಿಟ್ ಕಾಯಿನ್ ಹಗರಣ ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡಲು ಸರ್ಕಾರ ಚಿಂತನೆ ನಡೆಸಿದೆ.

Key words: Monsoon Session, congress, Government, bjp, jds