ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ: ರಾಜ್ಯಪಾಲರಿಗೆ MLC ಹೆಚ್. ವಿಶ್ವನಾಥ್ ಸಲಹೆ.

ಮೈಸೂರು,ಆಗಸ್ಟ್,22,2024 (www.justkannada.in): ಮುಡಾ ಪ್ರಕರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿ ಬಂದಿದೆ.  ಹೀಗಾಗಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ರಾಜ್ಯಪಾಲರಿಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸಲಹೆ ನೀಡಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್,  ಮುಡಾ ಹಗರಣ ಗಬ್ಬೆದ್ದು ನಾರುತ್ತಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಮೇಲೆ ಆಪಾದನೆ ಕೇಳಿ ಬಂದಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಕ್ಯಾಬಿನೆಟ್ ಮೀಟಿಂಗ್ ಕರೆದು ಪ್ರಾಸಿಕ್ಯೂಷನ್ ವಿರುದ್ದ ನಿರ್ಣಯ ಕೈಗೊಂಡಿದ್ದು ಯಾಕೆ? ವಾಲ್ಮೀಕಿ ಹಗರಣದಲ್ಲಿ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಮುಡಾ ಪ್ರಕರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿ ಬಂದಿದೆ. ಆದ್ದರಿಂದ ಸರ್ಕಾರವನ್ನು ಅಮಾನತ್ತಿನಲ್ಲಿಡಿ ಎಂದು ಆಗ್ರಹಿಸಿದರು.

ಈ ಹಿಂದೆ ವೀರೇಂದ್ರ ಪಾಟೀಲ್ ಸರ್ಕಾರವನ್ನು ಅಮಾನತ್ತಿನಲ್ಲಿಟ್ಟು ವಿಚಾರಣೆ ನಡೆಸಲಾಗಿತ್ತು. ನಂತರ ನಡೆದ ಚುನಾವಣೆಯಲ್ಲಿ ಬಂಗಾರಪ್ಪ ಸಿಎಂ ಆದರು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಸಿದ್ದರಾಮಯ್ಯ, ಕುಮಾರಸ್ವಾಮಿ, ನನಗೆ ಎಲ್ಲರಿಗೂ ಒಂದೇ ಕಾನೂನು ಅನ್ವಯ. ಸಿದ್ದರಾಮಯ್ಯ ಪ್ರಕರಣದಲ್ಲಿ ಇನ್ನಷ್ಟೇ ತನಿಖೆ ಆಗಬೇಕಿದೆ. ಆದರೆ ಕುಮಾರಸ್ವಾಮಿ ಪ್ರಕರಣದಲ್ಲಿ ತನಿಖೆ ಆಗಿ ವರದಿ ಬಂದಿದೆ. ಕುಮಾರಸ್ವಾಮಿ ಅವರ ವಿರುದ್ಧವು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡದೆ ಯಾಕೆ ಇಟ್ಟುಕೊಂಡಿದ್ದೀರಾ? ಎದು ಪ್ರಶ್ನಿಸಿದರು.

ರಾಜ್ಯಪಾಲರನ್ನು ಕೆಟ್ಟ ಭಾಷೆಯಲ್ಲಿ ಹೀಗಳೆಯುವುದು ಗೌರವ ತರುವುದಿಲ್ಲ.

ಮುಡಾ ಹಗರಣದ ಬಗ್ಗೆ ಪರ-ವಿರೋಧ ಚರ್ಚೆ ಆಗುತ್ತಿದೆ.  ರಾಷ್ಟ್ರದಲ್ಲಿ ರಾಜ್ಯದ ಮಾನ ಹರಾಜಾಗುತ್ತಿದೆ.‌ ಮಹಾರಾಜರ ಕಾಲದಿಂದ ಕಾಪಾಡಿಕೊಂಡು ಬಂದ ಶ್ರೀಗಂಧದ ವಾಸನೆ ಈಗ ದುರ್ನಾತ ಬೀರುತ್ತಿದೆ.  ಕಾಂಗ್ರೆಸ್ ನಾಯಕರು  ರಾಜ್ಯಪಾಲರನ್ನು ಕೆಟ್ಟ ಭಾಷೆಯಲ್ಲಿ ಹೀಗಳೆಯುವುದು ಗೌರವ ತರುವುದಿಲ್ಲ.  ಕೇಂದ್ರ ಸಚಿವ ಹೆಚ್. ಡಿ‌ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವ ಭಾಷೆ ಸರಿಯಿಲ್ಲ ಎಂದು ಹೆಚ್.ವಿಶ್ವನಾಥ್ ಕಿಡಿಕಾರಿದರು.

ಸಿದ್ದರಾಮಯ್ಯ ಕೈಕೆಳಗೇ ದಾಖಲೆ ತಿದ್ದುವ ಕೆಲಸ

ಸಿದ್ದರಾಮಯ್ಯ ಕೈಕೆಳಗೇ ದಾಖಲೆ ತಿದ್ದುವ ಕೆಲಸ ನಡೆಯುತ್ತಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೆಲಿಕಾಪ್ಟರ್‌ ನಲ್ಲಿ ಬಂದು ದಾಖಲೆಗಳನ್ನು ಹೊತ್ತೊಯ್ದರು, ಇದು ಕಳ್ಳತನ. ಸಿಎಂ ಪತ್ನಿಗೆ ಸಂಬಂಧಪಟ್ಟ ದಾಖಲೆಗಳಿಗೆ ವೈಟ್ನರ್ ಹಾಕಲಾಗುತ್ತಿದೆ.  ರಾಜ್ಯದಲ್ಲಿ ಯಾವಾಗಲೂ ಇಂತಹ ಪ್ರಕರಣಗಳು ನಡೆದಿರಲಿಲ್ಲ.  ಮುಡಾ ಆಯುಕ್ತರಾಗಿದ್ದ ಜಿ ಟಿ ದಿನೇಶ್ ಕುಮಾರ್ ರನ್ನು ಒದ್ದು ಒಳಗೆ ಹಾಕಬೇಕಿತ್ತು.  ನಿಮಗೆ ಬೇಕಾದವರು ಅಂಥ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೆಚ್.ವಿಶ್ವನಾಥ್  ಹರಿಹಾಯ್ದರು.

Key words: muda case, suspend, state government, MLC H. Vishwanath