ಪ್ರಾಸಿಕ್ಯೂಷನ್ ​ಗೆ ಅನುಮತಿ: ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಆಗಸ್ಟ್ , 22,2024 (www.justkannada.in):  ಬಾಕಿ ಇರುವ ಪ್ರಾಸಿಕ್ಯೂಷನ್ ​ಗೆ ಅನುಮತಿ ನೀಡುವ ಬಗ್ಗೆ ಕ್ರಮಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲಹೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.  ಸಭೆಯಲ್ಲಿ ರಾಜ್ಯಪಾಲರ ಮುಂದೆ ಬಾಕಿ ಇರುವ ಪ್ರಾಸಿಕ್ಯೂಷನ್​ ಮನವಿ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಬಾಕಿ ಇರುವ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಸರ್ಕಾರ ಇಂದಿನ ಸಚಿವ ಸಂಪುಟದಲ್ಲಿ ನೆರವು ಮತ್ತು ಸಲಹೆ ನೀಡುವ ನಿರ್ಣಯ ಕೈಗೊಂಡಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಎಚ್​ಕೆ ಪಾಟೀಲ್,  ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​​ ಗೆ ಇರುವ ಹಲವು ಪ್ರಕರಣಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನು ಕೆಲವು ಪ್ರಕರಣ ಲೋಕಾಯುಕ್ತದಿಂದ ರಾಜ್ಯಪಾಲರಿಗೆ ಹೋಗಿದೆ. ಕೆಲವು ತನಿಖಾ ಸಂಸ್ಥೆಗಳ ವರದಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಅನೇಕ ಅನುಮೋದನೆ ಅರ್ಜಿಗಳು ರಾಜ್ಯಪಾಲರ ಸಮಕ್ಷಮದಲ್ಲಿ ಬಾಕಿ ಇವೆ. ಈ ಅರ್ಜಿಗಳಲ್ಲಿ ಕೆಲವು ಚಾರ್ಜ್​ಶೀಟ್ ಸಲ್ಲಿಕೆಗೆ ಒಪ್ಪಿಗೆ ಬಾಕಿ ಇವೆ. ಭ್ರಷ್ಟಾಚಾರ ತಡೆಕಾಯ್ದೆ ಸೆಕ್ಷನ್ 19ರಡಿ ಅನುಮೋದನೆಗೆ ಬಾಕಿ ಇದೆ. 17ಎ ಅಡಿಯಲ್ಲೂ ರಾಜ್ಯಪಾಲರ ಪೂರ್ವಾನುಮತಿಗೆ ಬಾಕಿ ಇದೆ. ಆ ಎಲ್ಲಾ ಪ್ರಕರಣಗಳ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ 163ರ ಅನ್ವಯ ರಾಜ್ಯಪಾಲರಿಗೆ ಸಲಹೆ ನೀಡಲು ಸಂಪುಟ ನಿರ್ಣಯಿಸಿದೆ ಎಂದು ತಿಳಿಸಿದರು.

Key words: Permission, Prosecution: Decision, Cabinet, meeting