ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಹೆಚ್ ಡಿಡಿ ಘೋಷಣೆ

ಬೆಂಗಳೂರು,ಅಕ್ಟೋಬರ್,24,2024 (www.justkannada.in): ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಆಯ್ಕೆ ಕಸರತ್ತಿಗೆ ತೆರೆ ಬಿದ್ದಂತಾಗಿದೆ. ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಘೋಷಣೆ ಮಾಡಿದ್ದಾರೆ.

ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೊಂದಿಗೆ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ನಿಖಿಲ್ ಸ್ಪರ್ಧೆ ಬಗ್ಗೆ ಮೊನ್ನೆಯೇ ನಿರ್ಧರಿಸಲಾಗಿತ್ತು. ನಿಖಿಲ್ ಅಭ್ಯರ್ಥಿ ಮಾಡಲು ಕಾರ್ಯಕರ್ತರಿಂದ ಒತ್ತಡವಿದೆ.  ಹೀಗಾಗಿ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನಾನೂ ಭಾಗಿಯಾಗುವೆ. ಬಿಎಸ್ ಯಡಿಯೂರಪ್ಪ ಸೇರಿ ಮೈತ್ರಿ ನಾಯಕರು ಭಾಗಿಯಾಗಲಿದ್ದಾರೆ. ನಿಖಿಲ್ ಪರ ಪ್ರಚಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

 ಬಿಎಸ್ ವೈ ನಿವಾಸಕ್ಕೆ ಹೆಚ್ ಡಿಕೆ, ನಿಖಿಲ್

ಇನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಜತೆ ಮಾತುಕತೆ ಬಳಿಕ ಇದೀಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು, ಚನ್ನಪಟ್ಟಣ ಅಭ್ಯರ್ಥಿ ಕುರಿತು ಚರ್ಚಿಸುತ್ತಿದ್ದಾರೆ.

Key words: Channapatna, Nikhil Kumaraswamy, alliance Candidate, Contest