ಎಐಸಿಸಿ ಅಧ್ಯಕ್ಷರ ಓಲೈಸಲು ಕಲ್ಬುರ್ಗಿಯಲ್ಲಿ ಸಂಪುಟ ಸಭೆ ನಾಟಕ- ಬಿವೈ ವಿಜಯೇಂದ್ರ ಟೀಕೆ

ಕಲಬುರಗಿ,ಸೆಪ್ಟಂಬರ್,18,2024 (www.justkannada.in): ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರನ್ನು ಓಲೈಸಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಚಿವ ಸಂಪುಟ ಸಭೆಯ ನಾಟಕವಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ,  ಅಚಾನಕ್ ಆಗಿ ಸಿಎಂ ಸಿದ್ದರಾಮಯ್ಯಗೆ ಕಲಬುರುಗಿ ನೆನಪಾಗಿದೆ. ಅಧಿಕಾರಕ್ಕೆ ಬಂದು 1 ವರ್ಷವಾದರೂ ಕಲಬುರಗಿ ನೆನಪಾಗಿರಲಿಲ್ಲ.  ನಿನ್ನೆ ಸಂಪುಟ ಸಭೆಯಲ್ಲಿ ಯಾವುದೇ ಹೊಸ ವಿಚಾರ ಹೇಳಿಲ್ಲ. ಈ ಭಾಗಕ್ಕೆ 5 ಸಾವಿರ ಕೋಟಿ ಕೊಡುತ್ತೇವೆ; ಇಲ್ಲಿ ಶಾಲಾ ಕಾಲೇಜು ಮಾಡುತ್ತೇವೆ. 1,100 ಕೋಟಿಯ ಪ್ಯಾಕೇಜ್ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇದರಲ್ಲಿ ಹೊಸದೇನೂ ಇಲ್ಲ ಎಂದರು.

ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯೋ ಅಥವಾ ಬೆಂಗಳೂರು, ಮೈಸೂರು ಮುಖ್ಯಮಂತ್ರಿಯೋ ಎಂದು ಜನ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಳ್ಳಾಡುತ್ತಿದೆ. ಸಿಎಂ ಮತ್ತು ಡಿಸಿಎಂ ಅಥವಾ ಯಾವುದೇ ಸಚಿವರು ಇವತ್ತು ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪ್ರವಾಸ ಮಾಡುತ್ತಿಲ್ಲ. ಏನು ಅಭಿವೃದ್ಧಿ ಆಗಬೇಕೆಂದು ಚಿಂತನೆ ಮಾಡುತ್ತಿಲ್ಲ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದರು.

Key words: Cabinet meeting,  drama,  Kalburgi, BY Vijayendra