ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ: ರಾಜ್ಯದ ಸಂಸದರಿಗೆ ಸಿಎಂ‌ ಸಿದ್ದರಾಮಯ್ಯ ಕರೆ

ಚಾಮರಾಜನಗರ  ಜುಲೈ, 10,2024 (www.justkannada.in):  ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ ಎಂದು ರಾಜ್ಯದ ಸಂಸದರಿಗೆ ಚಾಮರಾಜನಗರದ ವೇದಿಕೆಯಲ್ಲಿ ನಿಂತು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನನ್ನ ಗುರಿಯಾಗಿದೆ. ಇದೇ ಕಾಂಗ್ರೆಸ್ ಪಕ್ಷದ ಆದ್ಯತೆಯೂ ಆಗಿದೆ ಎಂದರು.

ಈ ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರು ನಾವು ಕಾಂಗ್ರೆಸ್ಸಿಗರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಮಹಾತ್ಮಗಾಂಧಿ ಕರೆ ಕೊಟ್ಟಾಗ ಜನಸಂಘ  (ಬಿಜೆಪಿಯವರು) ಬ್ರಿಟಿಷರ ಜೊತೆ ಕೈಜೋಡಿಸಿದರೆ ಉಳಿದ ಭಾರತೀಯರೆಲ್ಲರೂ  ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು ಎಂದು ಹೋರಾಟದ ದಿನಗಳನ್ನು ನೆನಪಿಸಿದರು.

ಸರ್ವ ಜಾತಿ ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.

ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಯವರು ದೇಶದ ಮತದಾರರನ್ನು  ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ ಎಂದರು.

ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು.  ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆ ಎಂದರು.

ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಜಮೀರ್ ಅಹಮದ್ ಖಾನ್, ಕೆ.ಹೆಚ್.ಮುನಿಯಪ್ಪ, ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಗಳ ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಕೃಷ್ಣಮೂರ್ತಿ, ಅನಿಲ್ ಚಿಕ್ ಮಾದು, ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ನರೇಂದ್ರ, MLC ತಿಮ್ಮಯ್ಯ, ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್,  ಪಕ್ಷದ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಸೇರಿ‌ ಇತರೆ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Key words: Chamarajanagar, CM, Siddaramaiah, state, MPs