ರಾಮನಗರ ಹೆಸರು ಬದಲಾವಣೆ ಮಾಡಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ- ಮಾಜಿ ಸಿಎಂ ಹೆಚ್.ಡಿಕೆ ಎಚ್ಚರಿಕೆ.

ಬೆಂಗಳೂರು,ಅಕ್ಟೋಬರ್ 26,2023(www.justkannada.in): ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸರ್ಕಾರಕ್ಕೆ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಚನ್ನಪಟ್ಟಣ, ರಾಮನಗರ ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಈ ಕುರಿತು ಮಾತನಾಡಿದ  ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ, ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ನನ್ನ ಆರೋಗ್ಯ ಲೆಕ್ಕಿಸದೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ರಾಮನಗರ ಜೊತೆ ವ್ಯವಹಾರಿಕ ಸಂಬಂಧವಿಲ್ಲ, ಭಾವನಾತ್ಮಕ ಸಂಬಂಧವಿದೆ. ನಾನು ಹಾಸನದಲ್ಲಿ ಹುಟ್ಟಿದ್ದು, ನನ್ನ ಅಂತ್ಯ ರಾಮನಗರದಲ್ಲಿ. ಹೀಗಾಗಿ ನನ್ನ ಕೊನೆಯ ಉಸಿರು ಇರುವ ತನಕ ರಾಮನಗರಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

ನಾನು ಹುಟ್ಟಿದ್ದು ಹಾಸನ ಆದರೂ ನನ್ನ ಜೀವನ ಅಂತ್ಯ ಆಗುವುದು ರಾಮನಗರದಲ್ಲೇ. ನನ್ನ ಹೋರಾಟಕ್ಕೆ ರಾಮನಗರದ ಜನರ ಸಹಕಾರ ಕೇಳುತ್ತೇನೆ. ಎಲ್ಲವು ಜನರೇ ತೀರ್ಮಾನ ಮಾಡುತ್ತಾರೆ ಎಂದು ಹೆಚ್.ಡಿ ಕುಮಾರಸ್ವಾಮಿ  ಹೇಳಿದರು.

Key words:  name – Ramanagara – changed-strike – former CM-HDK