ಸಿಎಂ ,ಡಿಸಿಎಂ ಬಗ್ಗೆ ಚರ್ಚೆ: ಸರ್ಕಾರ ನಿಷ್ಕ್ರಿಯ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

ಹುಬ್ಬಳ್ಳಿ,ಜೂನ್,29,2024 (www.justkannada.in): ರಾಜ್ಯದಲ್ಲಿ ಸಿಎಂ, ಡಿಸಿಎಂ ಹುದ್ದೆ ಬಗ್ಗೆ ಚರ್ಚೆಯಾಗುತ್ತಿರುವುದನ್ನ ನೋಡಿದರೇ ಈ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಅಂತಾ ಹೇಳಿಕೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಗೆ ಕಮಾಂಡ್ ಇಲ್ಲ, ಇನ್ನು ಹೈಕಮಾಂಡ್ ಎಲ್ಲಿ? ಸಿಎಂ, ಡಿಸಿಎಂ ಬಗ್ಗೆ ಚರ್ಚೆ ನಡೆಯುತ್ತಿರುವುದುದನ್ನು ನೋಡಿದರೆ ಸರ್ಕಾರ ನಿಷ್ಕ್ರಿಯವಾಗಿದೆ. ಕಾಂಗ್ರೆಸ್ ನವರು ಒಳಜಗಳನ್ನು ಮರೆತು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಲಿ ಎಂದು ಕಿಡಿಕಾರಿದರು.

ಕಾಂಗ್ರೆಸ್ ನ ಶಾಸಕರೇ ಅಭಿವೃದ್ಧಿಗೆ ದುಡ್ಡು ಕೊಡಿ ಎಂದು ಕೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಬಳಿ ಅನುದಾನಕ್ಕಾಗಿ ಜಗಳವಾಡುತ್ತಿದ್ದಾರೆ. ನಮ್ಮ ಪರಿಸ್ಥಿತಿ ಕೆಟ್ಟಿದೆ ಎಂದು ಕಾಂಗ್ರೆಸ್ ಶಾಸಕರೇ ಮಾತನಾಡಿಕೊಳ್ತಿದ್ದಾರೆ ಎಂದು ಹರಿಹಾಯ್ದರು.

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯನವರು ಅದಕ್ಕೂ ನನಗೂ ಸಂಬಂಧವಿಲ್ಲ ಅನ್ನೋ ತರಹ ಇದ್ದಾರೆ.  ಮುಖ್ಯಮಂತ್ರಿ ಬಳಿ ಹಣಕಾಸು ಇಲಾಖೆ ಇದೆ. ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬರದೇ ಹಗರಣ ನಡೆದಿದೆಯಾ? ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಹೊರಬೇಕು.  ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Key words: Government, inactive, Union Minister, Prahlad Joshi