ಹೈಕೋರ್ಟ್ ತೀರ್ಪು ಏಕಪಕ್ಷೀಯ: ರಾಜಕೀಯ ಮತ್ತು ಕಾನೂನು ಕ್ಷೇತ್ರಕ್ಕೆ ಕಪ್ಪು ಚುಕ್ಕಿ- ಹೆಚ್.ಎ ವೆಂಕಟೇಶ್

ಮೈಸೂರು,ಸೆಪ್ಟಂಬರ್,24,2024 (www.justkannada.in):  ಇಂದು ಕರ್ನಾಟಕ ಹೈಕೋರ್ಟ್ ಪ್ರಕಟಿಸಿದ ತೀರ್ಪು ಏಕಪಕ್ಷೀಯವಾಗಿದೆ. ರಾಜಕೀಯ ಮತ್ತು ಕಾನೂನು ಕ್ಷೇತ್ರಕ್ಕೆ ಕಪ್ಪು ಚುಕ್ಕಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ.

ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್,  ಪ್ರಜಾಪ್ರಭುತ್ವದ ಚುನಾಯಿತ ಸರ್ಕಾರಕ್ಕೆ ಬಿಜೆಪಿ, ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತಕ್ಕೆ ಧಕ್ಕೆ ತಂದಿದೆ. ಕಾಂಗ್ರೆಸ್ ಪಕ್ಷದ ಬದ್ಧತೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಸಹಿಸದೆ ಬಿಜೆಪಿ ಮತ್ತು ಜೆಡಿಎಸ್ ಕುತಂತ್ರ ನಡೆಸಿರುವುದು ದುರಂತ. ಕರ್ನಾಟಕದ ರಾಜಕಾರಣ ಇತಿಹಾಸದಲ್ಲಿಯೇ ಕರಾಳ ದಿನವಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಮೂಡಾ ಹಗರಣಕ್ಕೂ ಸಂಬಂಧ ಇಲ್ಲದಿದ್ದರೂ ಅವರನ್ನೇ ದೃಷ್ಟಿಯಾಗಿಟ್ಟುಕೊಂಡು ನಡೆಸಿದ ವ್ಯವಸ್ಥಿತ ಸಂಚನ್ನು ರಾಜ್ಯದ ಜನತೆ ಎಂದೆಂದಿಗೂ ಕ್ಷಮಿಸುವುದಿಲ್ಲ. ಸಿಎಂ ರಾಜೀನಾಮೆ ಕೇಳುವ ಯಾವುದೇ ನೈತಿಕತೆ ಬಿಜೆಪಿ ಮತ್ತು ಜೆಡಿಎಸ್ ಗೆ ಇರುವುದಿಲ್ಲ. ಭ್ರಷ್ಟಾಚಾರದ ಪಿತಾಮಹಾರಂದೇ ಎನಿಸಿಕೊಂಡಿರುವ ಬಿಜೆಪಿ ಜೆಡಿಎಸ್ ಗೆ ಭ್ರಷ್ಟಾಚಾರವೇ ಅವರ ಉಸಿರಾಗಿದೆ. ಕರ್ನಾಟಕ ಜನತೆಯ ಆಶೀರ್ವಾದದಿಂದ 136 ಶಾಸಕರ ಬೆಂಬಲ ಹೊಂದಿರುವ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ. ಪಕ್ಷದ ಹೈಕಮಾಂಡ್ ಹಾಗೂ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ. ಮುಖ್ಯಮಂತ್ರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ನ್ಯಾಯಾಲಯ ಹೇಳಿಲ್ಲ. ಮುಖ್ಯಮಂತ್ರಿಗಳು ಕಾನೂನಾತ್ಮಕವಾಗಿ ಈ ಪ್ರಕರಣವನ್ನು ಎದುರಿಸುವುದರಿಂದ ಮುಖ್ಯಮಂತ್ರಿಗಳ ರಾಜೀನಾಮೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೆಚ್.ಎ ವೆಂಕಟೇಶ್ ತಿಳಿಸಿದರು.

Key words: High Court, verdict, CM Siddaramaiah, H.A Venkatesh