ಮೈಸೂರು ಫೆಬ್ರವರಿ ,12,2025 (www.justkannada.in): ಮೂರು ದಿನಗಳ ಕಾಲ ಅದ್ದೂರಿಯಾಗಿ 13ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ನಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ತಿಳಿಸಿದರು.
13 ನೇ ಕುಂಭಮೇಳದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ ತಿರುಮಕೂಡಲು ನರಸೀಪುರದಲ್ಲಿ ಕುಂಭಮೇಳ ನಡೆಯುತ್ತಿದೆ. ಜನಸಾಗರವೇ ಹರಿದು ಬಂದು ಪುಣ್ಯಸ್ನಾನ ಮಾಡುತ್ತಿದ್ದಾರೆ. 1989 ರಲ್ಲಿ ಮೊದಲ ಕುಂಭಮೇಳ ನಡೆಯಿತು. ಅಂದಿನಿಂದ ಪ್ರತಿ ಮೂರು ವರ್ಷಕ್ಕೆ ಒಮ್ಮೆ ಕುಂಭಮೇಳ ನಡೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿ ಮಾತ್ರ ಒಮ್ಮೆ ನಡೆಯಲಿಲ್ಲ ಎಂದು ಮಾಹಿತಿ ನೀಡಿದರು.
ಕುಂಭಮೇಳ ಆಚರಣೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿ ಅಗತ್ಯ ಅನುದಾನವನ್ನು ನೀಡಿದ್ದಾರೆ. ಜಿಲ್ಲಾಡಳಿತ ವ್ಯವಸ್ಥಿತವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದೆ. ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಧಾರ್ಮಿಕ ಸಹಿಷ್ಣುತೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಧಾರ್ಮಿಕ ಆಚಾರ ವಿಚಾರಗಳ ಆಚರಣೆಗೆ ಮುಕ್ತವಾದ ಅವಕಾಶವನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ. ಸಂವಿಧಾನ ಎಲ್ಲರ ಹಕ್ಕುಗಳನ್ನು ರಕ್ಷಣೆ ಮಾಡುತ್ತದೆ. ನಾವು ಭಾರತೀಯರು, ನಾವೆಲ್ಲರೂ ಒಂದೇ ನಮ್ಮಲ್ಲಿ ಮೇಲು ಕೀಳು ಭಾವನೆ ಇಲ್ಲ ಎಂಬ ಭಾವನೆಯನ್ನು ಪ್ರತಿಯೊಬ್ಬರೂ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು.
ನದಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿ. ತಮ್ಮ ಚರಂಡಿ, ಮನೆಯ ತ್ಯಾಜ್ಯ ನೀರನ್ನು ನದಿ ಕಾಲುವೆಗಳಿಗೆ ಹರಿಯಲು ಬಿಡಬಾರದು. ನೀರು ರಾಷ್ಟ್ರದ ಸಂಪತ್ತು. ಇದನ್ನು ಉಳಿಸಿ ಬೆಳಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ , ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು, ಕೈಲಾಸಾಶ್ರಮ ಮಹಾಸಂಸ್ಥಾನದ ತಿರುಚ್ಚಿ ಮಹಾಸ್ವಾಮಿಗಳು, ಶಿವಪುರಿ ಮಹಾಸ್ವಾಮಿಗಳು, ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.
Key words: Thirumakudalu, Kumbh Mela, people, Minister, Dr. H.C. Mahadevappa