ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗರೆಡ್ಡಿ

ಬೆಳಗಾವಿ,ಫೆಬ್ರವರಿ,24,2025 (www.justkannada.in):  ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಹಲ್ಲೆಗೊಳಗಾಗಿದ್ದ ಬಸ್ ಕಂಡಕ್ಟರ್ ಮಹದೇವಪ್ಪ ಅವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಇಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಂಡಕ್ಟರ್ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಲಾಗಿದೆ.  ನಾವೆಲ್ಲ ಕಂಡಕ್ಟರ್ ಮಹದೇವಪ್ಪ ಪರ ಇದ್ದೇವೆ.  ಹಲ್ಲೆ ಮಾಡಿದವರ ವಿರುದ್ದ ಗೂಂಡಾಕಾಯ್ದೆ ಹಾಕಬೇಕು ಎಂದರು.

‘ಹಲ್ಲೆಗೆ ಒಳಗಾಗಿರುವ ಮಹಾದೇವ ಅವರ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ತಮ್ಮ ಮೇಲೆ ಪೋಕ್ಸೊ ಪ್ರಕರಣ ದಾಖಲಾದ ಕಾರಣ ಮಹಾದೇವ ಆತಂಕಗೊಂಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಳ್ಳುವಾಗ ಪೊಲೀಸರು ಸಾಮಾನ್ಯ ಜ್ಞಾನವನ್ನೂ ಬಳಸಿಲ್ಲ. ಈ ಪ್ರಕರಣ ಹಿಂದಕ್ಕೆ ಪಡೆಯುವ ಹಾಗೂ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ಜರುಗಿಸುವ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡುತ್ತೇನೆ’ ಎಂದು ತಿಳಿಸಿದರು.

‘ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತಗೊಂಡ ಕಾರಣ, ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಸಾರಿಗೆ ನಿಗಮಗಳಿಗೂ ನಷ್ಟವಾಗುತ್ತದೆ. ಮಹಾರಾಷ್ಟ್ರದಲ್ಲಿ ನಮ್ಮ ಬಸ್ ಗೆ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಲ್ಲಿನ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

Key words: Minister, Ramalingareddy, health, bus conductor, Belgaum