ಮಾಜಿ ಸಿಎಂ ಬಿಎಸ್ ವೈ ನಿವಾಸಕ್ಕೆ ಸಂಸದ ಬೊಮ್ಮಾಯಿ ಭೇಟಿ, ಚರ್ಚೆ

ಬೆಂಗಳೂರು,ಅಕ್ಟೋಬರ್,17,2024 (www.justkannada.in):  ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಬಿಎಸ್ ವೈ  ಅವರ ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು.

ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಬಂದು ಮಾತನಾಡಿ ಅಂದರು, ಹೀಗಾಗಿ ಅವರೊಂದಿಗೆ ಮಾತಾಡಿದ್ದೇನೆ. ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಅಂತ ಕೇಳಿದರು, ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಅಂತ ಆಗಿದೆ. ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುವುದಕ್ಕೆ‌ ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಹೇಳಿದರು.

ಚನ್ನಪಟ್ಟಣ ಟಿಕಟ್ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ,  ಚನ್ನಪಟ್ಟಣದ  ಬಗ್ಗೆ  ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ  ಎಂದು ಹೇಳಿದರು.

Key words: MP Basavaraj Bommai, meet, former CM, BSY