ಅ.6ರಿಂದ ಯುವ ದಸರಾ: ವ್ಯಾಪಕ ಪೊಲೀಸ್ ಬಂದೋಬಸ್ತ್-ಜಿಲ್ಲಾ ಎಸ್ ಪಿ ವಿಷ್ಣುವರ್ಧನ್

ಮೈಸೂರು,ಅಕ್ಟೋಬರ್,4,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಕ್ಕಿದ್ದು ಅಕ್ಟೋಬರ್ 6ರಿಂದ ಯುವದಸರಾ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಯುವ ದಸರಾ ವಿಶೇಷಾಧಿಕಾರಿ ಹಾಗೂ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಮೈಸೂರು ಹೊರವಲಯದ ಉತ್ತನಹಳ್ಳಿ ಬಳಿಯ ವಿಶಾಲವಾದ ಮೈದಾನದಲ್ಲಿ ಯುವ ದಸರಾ ಆಯೋಜನೆ ಮಾಡಲಾಗಿದೆ. ಅಕ್ಟೋಬರ್ 6ರಂದು ಬಾಲಿವುಡ್ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಮತ್ತು ತಂಡದಿಂದ ಸಂಗೀತ ಮನರಂಜನೆ ಕಾರ್ಯಕ್ರಮ ನಡೆಯಲಿದೆ. ಅ. 7ರಂದು ಸಂಗೀತ ನಿರ್ದೇಶಕ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕ್ರಮ, ಅ. 8ರಂದು ಬಾಲಿಹುಡ್ ಖ್ಯಾತಿಯ ರ್ಯಾಪರ್ ಬಾದ್ ಷಾ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ, ಅ. 9ರಂದು ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ, ಅ. 10ರಂದು ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕದರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಯುವ ದಸರಾ ವೀಕ್ಷಣೆಗೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು, ಯುವ ದಸರಾ ವೀಕ್ಷಣೆಗೆ ಪ್ರತಿನಿತ್ಯ ಸುಮಾರು 50 ರಿಂದ 70 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಹೊರ ಜಿಲ್ಲೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. 4 ಎಸ್ ಪಿ., 12 ಡಿ ಎಸ್ ಪಿ., 37 ಸಿಪಿಐ, 76 ಪಿ ಎಸ್ ಐ., 110 ಎ ಎಸ್ ಐ., 600 ಪೊಲೀಸರು, 100 ಮಹಿಳಾ ಪೊಲೀಸ್ ಸಿಬ್ಬಂದಿ, 300 ಹೋಂ ಗಾರ್ಡ್ ಗಳು ಸೇರಿದಂತೆ 1239 ಮಂದಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ 6 ಕೆಎಸ್ ಆರ್ ಪಿ., 10 ಡಿಎಆರ್., 10 ಎ ಎಸ್ ಸಿ., 4 ಕ್ಯು ಆರ್ ಟಿ, 2 ಆಂಬ್ಯುಲೆ‌ನ್ಸ್, 2 ಅಗ್ನಿಶಾಮಕ ದಳದ ವಾಹನ, 1 ಒಂದು ಮೊಬೈಲ್ ಕಮಾಂಡೋ ವಾಹನ ನಿಯೋಜನೆ‌ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವನ್ಯಜೀವಿ ಹಾವಳಿ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವ ವಿವಿಐಪಿ, ಗಣ್ಯರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳು ಅಳವಡಿಕೆ ಮಾಡಲಾಗಿದೆ. ಪ್ರತಿ ಕಾರ್ಯಕ್ರಮಕ್ಕೂ 5 ಸಾವಿರ ಟಿಕೆಟ್ ಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಎನ್ ವಿಷ್ಣುವರ್ಧನ್ ಮಾಹಿತಿ‌ ನೀಡಿದರು.

Key words: Yuva Dasara, Police security, SP Vishnuvardhan